ಬೆಂಗಳೂರು, ಸೆಪ್ಟೆಂಬರ್ 04: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ಸಂಕಷ್ಟ ಅನುಭವಿಸುತ್ತಿರುವ ರಾಜ್ಯದ ಜನತೆಗೆ ಮತ್ತೊಂದು ಹೊರೆ ಬೀಳುವ ಸಾಧ್ಯತೆ ಕಾಣಿಸಿಕೊಂಡಿದೆ. ಸರ್ಕಾರಿ ಸಾರಿಗೆ ಬಸ್ಗಳ ಪ್ರಯಾಣ ದರವನ್ನು ಶೀಘ್ರದಲ್ಲೇ ಪರಿಷ್ಕರಿಸುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಸಾರಿಗೆ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ.
ಕಳೆದ ಎಂಟು ತಿಂಗಳ ಅವಧಿಯಲ್ಲಿ ತೈಲೋತ್ಪನ್ನಗಳ ಬೆಲೆಯಲ್ಲಿ ಏರಿಕೆಯಾಗಿದ್ದರೂ, ಸರ್ಕಾರಿ ಬಸ್ ಪ್ರಯಾಣ ದರವನ್ನು ಹೆಚ್ಚಿಸಲಾಗಿಲ್ಲ. ಇದರಿಂದ ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳು ಭಾರೀ ಆರ್ಥಿಕ ನಷ್ಟವನ್ನು ಎದುರಿಸುತ್ತಿವೆ ಎಂದು ಸಚಿವರು ತಿಳಿಸಿದ್ದಾರೆ.
ದರ ಪರಿಷ್ಕರಣೆ ಕುರಿತು ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಅತುಲ್ ತಿವಾರಿ ನೇತೃತ್ವದ ಸಮಿತಿ ಅಧ್ಯಯನ ನಡೆಸುತ್ತಿದೆ. ಸಮಿತಿಯು ತನ್ನ ವರದಿಯನ್ನು ಶೀಘ್ರದಲ್ಲೇ ಸರ್ಕಾರಕ್ಕೆ ಸಲ್ಲಿಸುವ ನಿರೀಕ್ಷೆಯಿದ್ದು, ವರದಿ ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ.
ಆದರೆ ಜನಸಾಮಾನ್ಯರ ಮೇಲೆ ಹೆಚ್ಚಿನ ಹೊರೆ ಬೀಳದಂತೆ ಸೀಮಿತ ಪ್ರಮಾಣದಲ್ಲಿ ಮಾತ್ರ ಪ್ರಯಾಣ ದರ ಪರಿಷ್ಕರಣೆ ಮಾಡುವ ಉದ್ದೇಶವಿದೆ ಎಂದು ಸಚಿವ ಭೈರತಿ ಸುರೇಶ್ ಸ್ಪಷ್ಟಪಡಿಸಿದ್ದಾರೆ.
ಶಕ್ತಿ ಯೋಜನೆ ಫಲಾನುಭವಿಗಳಿಗೆ ಉಚಿತ ಸ್ಮಾರ್ಟ್ ಕಾರ್ಡ್
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯಡಿ ಸರ್ಕಾರಿ ಸಾಮಾನ್ಯ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ನೀಡಲಾಗುತ್ತಿದೆ. ಈ ಯೋಜನೆಯ ಫಲಾನುಭವಿಗಳ ಪೈಕಿ ಮೊದಲ ಹಂತದಲ್ಲಿ ಒಂದು ಕೋಟಿಗೂ ಹೆಚ್ಚು ಮಹಿಳೆಯರಿಗೆ ಉಚಿತ ಸ್ಮಾರ್ಟ್ ಕಾರ್ಡ್ಗಳನ್ನು ವಿತರಿಸಲು ಸರ್ಕಾರ ನಿರ್ಧರಿಸಿದೆ.
ಈ ಯೋಜನೆಗಾಗಿ ಸುಮಾರು 250 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ತಿಳಿಸಿರುವ ಸಚಿವರು, ಸ್ಮಾರ್ಟ್ ಕಾರ್ಡ್ ವಿತರಣಾ ಪ್ರಕ್ರಿಯೆಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದಿದ್ದಾರೆ.
ಬಿಎಂಟಿಸಿಗೆ 4,500ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್ಗಳು
ಇನ್ನೊಂದೆಡೆ, ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಬಿಎಂಟಿಸಿಗೆ 4,500 ಎಲೆಕ್ಟ್ರಿಕ್ ಬಸ್ಗಳನ್ನು ಸೇರ್ಪಡೆಗೊಳಿಸಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.
ಕೇಂದ್ರ ಸರ್ಕಾರದ ಪಿಎಂ ಇ-ಡ್ರೈವ್ ಯೋಜನೆಯಡಿ ಈ ಬಸ್ಗಳನ್ನು ಪೂರೈಸಲಾಗುತ್ತದೆ. ಸಾರಿಗೆ ಇಲಾಖೆ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಬಿಎಂಟಿಸಿಗೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಎಲೆಕ್ಟ್ರಿಕ್ ಬಸ್ಗಳು ಸೇರ್ಪಡೆಯಾಗಲಿವೆ ಎಂದು ಸಚಿವರು ತಿಳಿಸಿದ್ದಾರೆ.
ಯೋಜನೆಯಡಿ 12 ಮೀಟರ್ ಉದ್ದದ 3,800 ಬಸ್ಗಳು ಹಾಗೂ 9 ಮೀಟರ್ ಉದ್ದದ 900 ಬಸ್ಗಳು ಇರಲಿವೆ. ಇವುಗಳಲ್ಲಿ 400 ಬಸ್ಗಳು ಹವಾನಿಯಂತ್ರಿತ ಸೌಲಭ್ಯವನ್ನು ಹೊಂದಿರಲಿವೆ. ವಾಹನ ತಯಾರಿಕಾ ಸಂಸ್ಥೆಗಳು ಹಂತಹಂತವಾಗಿ ಬಸ್ಗಳನ್ನು ತಯಾರಿಸಿ ಬಿಎಂಟಿಸಿಗೆ ಪೂರೈಕೆ ಮಾಡಲಿವೆ.
ಈ ಯೋಜನೆಗಾಗಿ ರಾಜ್ಯ ಸರ್ಕಾರ ಪ್ರತಿ ವರ್ಷ ಸುಮಾರು 600 ಕೋಟಿ ರೂಪಾಯಿ ವೆಚ್ಚ ಮಾಡಲಿದ್ದು, 20 ವರ್ಷಗಳಲ್ಲಿ ಸುಮಾರು 12,000 ಕೋಟಿ ರೂಪಾಯಿ ಖರ್ಚಾಗುವ ಅಂದಾಜಿದೆ.
ಎಲೆಕ್ಟ್ರಿಕ್ ಬಸ್ಗಳ ಬಳಕೆಯಿಂದ ಬೆಂಗಳೂರು ನಗರದಲ್ಲಿ ವಾಹನಗಳಿಂದ ಉಂಟಾಗುವ ವಾಯು ಮಾಲಿನ್ಯವನ್ನು ಕಡಿಮೆ ಮಾಡುವ ಉದ್ದೇಶ ಹೊಂದಲಾಗಿದೆ. ಜೊತೆಗೆ, ಕೇಂದ್ರ ಸರ್ಕಾರದಿಂದ 2,000 ಕೋಟಿ ರೂಪಾಯಿ ಸಾಲ ಪಡೆಯುವ ಯೋಜನೆಯೂ ಇದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಹೊಸ ಬಸ್ ಡಿಪೋಗಳ ನಿರ್ಮಾಣ ಹಾಗೂ ಹಳೆಯ ಬಸ್ ನಿಲ್ದಾಣಗಳ ಆಧುನೀಕರಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ.








Leave a comment